ಮೈಸೂರು : ಖಾಸಗಿ ಮೈಕ್ರೋಫೈನಾನ್ಸ್ ಸಂಸ್ಥೆಯ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆತಂಕದ ನಡುವೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರದಲ್ಲಿ ನಡೆದಿದೆ.
ನಂಜಾಪುರ ಗ್ರಾಮದ ವಸಂತಕುಮಾರ್ ಅವರ ಪುತ್ರ ರಂಜಿತ್ (32) ಆತ್ಮಹತ್ಯೆಗೆ ಶರಣಾದ ಯುವಕ. ಮನೆ ನಿರ್ಮಾಣಕ್ಕಾಗಿ ಖಾಸಗಿ ಮೈಕ್ರೋಫೈನಾನ್ಸ್ ಸಂಸ್ಥೆಯಲ್ಲಿ 12 ಲಕ್ಷ ರೂಪಾಯಿ ಸಾಲ ಪಡೆದಿದ್ದ ರಂಜಿತ್, ಈವರೆಗೆ ಸುಮಾರು 8 ಲಕ್ಷ ರೂಪಾಯಿ ಹಣವನ್ನು ಮರುಪಾವತಿ ಮಾಡಿದ್ದರು ಎಂದು ತಿಳಿದುಬಂದಿದೆ.
ಸಾಲ ಮರುಪಾವತಿಯಲ್ಲಿ ವಿಳಂಬವಾದ ಹಿನ್ನೆಲೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಎರಡು ಬಾರಿ ಮನೆಗೆ ಬೀಗ ಹಾಕಿದ್ದರು ಎಂಬ ಆರೋಪ ಕೇಳಿಬಂದಿದೆ. ಇತ್ತೀಚೆಗಷ್ಟೇ ರಂಜಿತ್ ಸುಮಾರು 3 ಲಕ್ಷ ರೂಪಾಯಿ ಪಾವತಿಸಿದ್ದರೂ ಕಿರುಕುಳ ಮುಂದುವರಿದಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮಳೆ ಕೊರತೆಯಿಂದ ಜಮೀನಿನ ಬೆಳೆ ಕೈಕೊಟ್ಟ ಪರಿಣಾಮ ರಂಜಿತ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಮತ್ತೆ ಮನೆಗೆ ಬೀಗ ಹಾಕಬಹುದು ಎಂಬ ಆತಂಕದ ಜೊತೆಗೆ ಗ್ರಾಮದಲ್ಲಿ ಅವಮಾನವಾಗುತ್ತದೆ ಎಂಬ ಭಯದಲ್ಲಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಪತ್ನಿ ಭಾಗ್ಯ ಅವರ ಬಳಿ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಹೇಳಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ರಂಜಿತ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿಯ ಸಾವಿಗೆ ಮೈಕ್ರೋಫೈನಾನ್ಸ್ ಸಿಬ್ಬಂದಿಯ ಕಿರುಕುಳವೇ ಕಾರಣ ಎಂದು ಪತ್ನಿ ಭಾಗ್ಯ ಗಂಭೀರ ಆರೋಪ ಮಾಡಿದ್ದಾರೆ. ಘಟನೆ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ನಟ ಯಶ್ ಪರ ನಿಂತ ಹ್ಯಾಟ್ರಿಕ್ ಹೀರೊ ಶಿವಣ್ಣ.. ‘ಟಾಕ್ಸಿಕ್’ ನೆಗೆಟಿವ್ ವಿಮರ್ಶೆಗೆ ಖಡಕ್ ಪ್ರತಿಕ್ರಿಯೆ!


















