ಕೊಡಗು ಜಿಲ್ಲೆ ಮಡಿಕೇರಿ ಹೊರವಲಯದ ಮರಗೋಡು – ಕಟ್ಟೆಮಾಡು ರಸ್ತೆ ಕಳೆದ ಹಲವು ವರ್ಷಗಳಿಂದ ತೀರಾ ಹದಗೆಟ್ಟಿದ್ದು, ವಾಹನಗಳು ಸಂಚಾರ ಮಾಡಲು ಹರಸಾಹಸ ಮಾಡಬೇಕಾಗಿದೆ. ಈ ರಸ್ತೆ ಡಾಂಬರೀಕರಣವಾಗದೆ 15 ಕ್ಕೂ ಅಧಿಕ ವರ್ಷಗಳೇ ಕಳೆದಿವೆ. ಇದರಿಂದ ರೋಸಿ ಹೋದ ಯುವಕರು ತಾವೇ ಸ್ವಂತ ಹಣದಲ್ಲಿ ಕಾಮಗಾರಿ ನಡೆಸಿದ್ದಾರೆ.
ರಸ್ತೆ ಡಾಮರೀಕರಣ ಮಾಡುವಂತೆ ಸರ್ಕಾರ, ಜನಪ್ರತಿನಿಧಿಗಳನ್ನು ಬಹಳಷ್ಟು ಬಾರಿ ಮನವಿ ಮಾಡಿಕೊಂಡರೂ ಯಾವ ಪ್ರಯೋಜನ ಕೂಡ ಇದುವರೆಗೂ ಆಗಿರಲಿಲ್ಲ. ಹೀಗಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಮಳೆಗಾಲ ಜೋರಾಗಿರುವುದರಿಂದ ವಾಹನ ಸವಾರರು , ದಾರಿ ಹೋಕರು, ವಿದ್ಯಾರ್ಥಿಗಳು ಓಡಾಡುವುದೇ ಕಷ್ಟಕರವಾದ ಹಿನ್ನೆಲೆಯಲ್ಲಿ ಕೊಡಗು ಗೌಡ ಫುಟ್ಬಾಲ್ ಅಕಾಡೆಮಿ ಸದಸ್ಯರು ಹಾಗೂ ಸ್ಥಳೀಯರು ಸೇರಿ ತಾವೇ ಹಣ ಹಾಕಿ ರಸ್ತೆ ಮಾಡಿದ್ದಾರೆ.
ಕಲ್ಲು, ಜಲ್ಲಿ, ಮಣ್ಣು ತಂದು ಶ್ರಮದಾನ ಮಾಡಿ ಗುಂಡಿಗಳನ್ನು ಮುಚ್ಚಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಶ್ರಮದಾನದಲ್ಲಿ ಧಾರಾಕಾರ ಮಳೆಯ ಮಧ್ಯೆಯೂ ಸ್ಥಳೀಯರು ಮತ್ತು ಅಕಾಡೆಮಿ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಗುಂಡಿ ಮುಚ್ಚುವುದರ ಜೊತೆಗೆ ಅಲ್ಲಲ್ಲಿ ಮಳೆ ನೀರು ಹರಿದುಹೋಗಲು ಚರಂಡಿಗಳನ್ನು ಕೂಡ ನಿರ್ಮಿಸಲಾಗಿದೆ. ಊರಿನ ಸಮಸ್ಯೆಗಳನ್ನು ಮುಂದೆ ಬಂದು ಬಗೆ ಹರಿಸಬೇಕಾಗಿದ್ದ ಸರ್ಕಾರಿ ಇಲಾಖೆಯ ಅಧಿಕಾರಿಗಳು ಗಾಢ ನಿದ್ದೆಗೆ ಜಾರಿವೆ. ಹೀಗಾಗಿ ನಾವೇ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಲ್ಪಿಸಲು ಮುಂದಾಗುವ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿದ್ದೇವೆ ಎಂದು ಯುವಕರು ಹೇಳಿದರು. ಇನ್ನಾದರೂ ರಸ್ತೆ ದುರಸ್ತಿ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹರಿಸಲಿ ಎಂದು ಈ ಮೂಲಕ ಆಗ್ರಹಿಸಿದ್ದಾರೆ.



















